Thursday, March 5, 2009

ಮಠಗಳೇ, ಮಠಗಳಿಂದ, ಮಠಗಳಿಗಾಗಿ...

ನಮ್ಮ ಪವಿತ್ರ ಸಂವಿಧಾನದಲ್ಲಿ ಉಲ್ಲೇಖಿಸಿರುವ ಸರಕಾರದ ಕರ್ತವ್ಯಗಳನ್ನು ಮಠ ಮಾನ್ಯಗಳ ಪದತಲದಲ್ಲಿ ಅಡವಿಟ್ಟು ಉದ್ದುದ್ದ ಮಲಗಿ ಪ್ರಜಾತಂತ್ರ ಎಂದರೆ, ಮಠಗಳಿಂದ, ಮಠಗಳಿಗಾಗಿ, ಮಠಗಳಿಗೋಸ್ಕರ ಎಂಬ ನೂತನ ಘೋಷಣೆ ಮಾಡುವುದನ್ನು ರಾಜ್ಯದ ಬಿಜೆಪಿ ಸರಕಾರ ಬಾಕಿ ಉಳಿಸಿಕೊಂಡಿದೆ.ಇನ್ನಾರು ತಿಂಗಳಲ್ಲಿ ಅದು ಆಗಬಹುದು ಯಾರಿಗೆ ಗೊತ್ತು?

ಈ ಕೆಳಗಿನ ಎರಡು ಘಟನೆಗಳನ್ನು ಓದಿ.

ನಿಮ್ಮ ೧೨ ವರ್ಷದ ಹುಡುಗನೊಬ್ಬ ತನ್ನದೇ ಊರಿನ ದಲಿತರ ಕೇರಿಯ ೬೦ ವರ್ಷದ ವ್ಯಕ್ತಿಯೊಬ್ಬನನ್ನು ಲೋ ಮಾರ, ಲೋ ಸಿದ್ಧ ಎಂದು ಏಕವಚನದಲ್ಲಿ ಅತ್ಯಂತ ವ್ಯಂಗ್ಯವಾಗಿ ಮಾತನಾಡಿಸುತ್ತಾನೆ. ಆದರೆ, ಆ ಹಿರಿಯ ವ್ಯಕ್ತಿಯನ್ನು ಹಾಗೆ ಏಕವಚನದಲ್ಲಿ ಸಂಬೋಧಿಸಬಾರದು ಎಂದು ನೀವು ಎಲ್ಲೂ ನಿಮ್ಮ ಮಕ್ಕಳಿಗೆ ಹೇಳಿ ಕೊಡಲಿಲ್ಲ. ಅದನ್ನೇ ಈ ನಾಡಿನ ಸವರ್ಣೀಯರು ಸಂಸ್ಕಾರವೆಂಬಂತೆ ನಡೆದುಕೊಂಡು ಬಂದರು. ನಿಮ್ಮ ಎದೆ ಮುಟ್ಟಿಕೊಂಡು ಹೇಳಿ, ಲೋ ಮಾರ, ಲೋ ಸಿದ್ಧ, ಲೋ ಕೆಂಚ ಎಂದು ಆ ದಲಿತ ವರ್ಗದ ಹಿರೀಕರನ್ನು ಕರೆವ ನಿಮ್ಮ ಮಕ್ಕಳಿಗೆ ಅದು ತಪ್ಪು ಎಂದು ಎಂದಾದರೂ ಹೇಳಿಕೊಟ್ಟಿದ್ದೀರಾ..? ಎಲ್ಲ ಜಾತಿಯವರನ್ನು ಒಳಗೊಂಡ ಅನುಭವ ಮಂಟಪ ಕಟ್ಟಿದ ಆ ಬಸವಣ್ಣ ಎದುರಿಗೆ ಬಂದವರು ಯಾರೇ ಆದರೂ, ಶರಣು ಎಂದರೆ, ಶರಣು ಶರಣಾರ್ಥಿ ಎಂದು ಎರಡು ಬಾರಿ ಹೇಳುತ್ತಿದ್ದರಂತೆ. ಅಂತಹ ಬಸವಣ್ಣನವರ ಲಿಂಗಾಯಿತ ಧರ್ಮವನ್ನು ನೀವು ಜಾತಿ ಎಂಬ ಪಟ್ಟ ಕಟ್ಟಿ ಕರ್ನಾಟಕದೊಳಕ್ಕೆ ಕಟ್ಟಿ ಹಾಕಿದಿರಿ. ಲಿಂಗಾಯಿತ ಅಥವಾ ವೀರಶೈವ ಎನ್ನುವುದನ್ನು ಎಂದೂ ಧರ್ಮವನ್ನಾಗಿಸಲು ನೀವು ಬಿಡಲೇ ಇಲ್ಲ. ಹಾಗೊಂದು ಪಕ್ಷ ಬಸವಣ್ಣನ ನಡೆಗಳು ನಿಮ್ಮ ಎದೆಯೊಳಗೆ ಮೂಡಿದ್ದರೇ ಅದು ಇವತ್ತು ವಿಶ್ವಧರ್ಮವಾಗಿರುತ್ತಿತ್ತು

೧೯೯೬ರಲ್ಲಿ ನಂಜನಗೂಡಿನ ಸಮಾರಂಭವೊಂದರಲ್ಲಿ ಸಂವೇದನಾಶೀಲ ರಾಜಕಾರಣಿ ವಿ.ಶ್ರೀನಿವಾಸ ಪ್ರಸಾದ್ ಹೇಳಿದ ಮಾತುಗಳಿವು. ಬಹುಶಃ ಅವತ್ತಿನ ಸಮಾರಂಭದಲ್ಲಿ ಸುಮಾರು ೧೦ ಸಾವಿರಕ್ಕೂ ಹೆಚ್ಚು ಮಂದಿ ನೆರೆದಿದ್ದರು. ಅದರಲ್ಲಿ ಸವರ್ಣೀಯರೇ ಹೆಚ್ಚಿದ್ದರು. ಎಲ್ಲದಕ್ಕಿಂತ ಮುಖ್ಯವಾಗಿ ಕರಾಳ ನೆನಪು ಎನಿಸಿದ ಬದನವಾಳು ಘಟನೆ ನಡೆದು ಮೂರು ವರ್ಷ ಕಳೆದಿತ್ತು. ಹಗೆಯ ಹಸಿ ಹಸಿ ವಾಸನೆ ಅಲ್ಲಲ್ಲಿ ಉಳಿದಿತ್ತು. ಅಂತಹ ಸಂದರ್ಭದಲ್ಲಿ ಶ್ರೀನಿವಾಸ್ ಪ್ರಸಾದ್ ಬಸವಣ್ಣನವರ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಲೇ ದಲಿತರನ್ನು ಕಡೆಗಣನೆಯಿಂದ ನೋಡುವವರ ಆತ್ಮಭಿಮಾನವನ್ನು ಪ್ರಶ್ನೆ ಮಾಡುತ್ತಾ ಹೋದರು. ಅದು ಇಂದಿಗೂ ನೆನಪಿನಲ್ಲಿ ಉಳಿಯುವ ಭಾಷಣ.

***

ಮೈಸೂರಿನ ಪ್ರಸಿದ್ಧ ಮಠವೊಂದಕ್ಕೆ ಹೋದಾಗ ಅಲ್ಲಿ ಸುಮಾರು ೧೦೦ ಕ್ಕೂ ಹೆಚ್ಚು ಮಂದಿ ಸ್ವಾಮಿಗಳನ್ನು ನೋಡಲು ಕಾಯುತ್ತಿದ್ದಾರೆ. ಮಠದ ಸಹಾಯಕರು ಒಬ್ಬೊಬ್ಬರಂತೆ ಎಲ್ಲರನ್ನು ಒಳಬಿಡುತ್ತಿದ್ದಾರೆ. ಇದು ಮಧ್ಯಾಹ್ನ ಮೂರು ಗಂಟೆಯವರೆಗೆ ನಡೆಯುತ್ತಲೇ ಇತ್ತು. ಹಾಗೆ ಜನರು ಸ್ವಾಮಿಗಳನ್ನು ನೋಡಲು ಬರುತ್ತಲೇ ಇದ್ದರು. ಬಂದವರಲ್ಲಿ ಕೆಲವರು ಅವರ ಮಕ್ಕಳಿಗೆ ಮಠದ ಶಾಲೆಯಲ್ಲಿ ಸೀಟು ಕೊಡಿಸಲು, ಕೆಲಸ ಕೇಳಲು ಬಂದಿದ್ದರು. ಅವರವರ ಭಕುತಿಗೆ ತಕ್ಕಂತೆ ಸ್ವಾಮೀಜಿಗಳಿಂದ ಆಶೀರ್ವಾದವು ದೊರೆಯುತ್ತಿತ್ತು. ಇದನ್ನು ನೋಡಿದಾಗ, ಸರಕಾರದ ಆಡಳಿತ ಯಂತ್ರವೊಂದು ಮಾಡಬೇಕಾದ ಕೆಲಸವನ್ನು ಸ್ವಾಮೀಜಿಯವರ ಮಾಡುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ಅನ್ನಿಸದೆ ಇರಲಾರದು. ಆದರೆ, ಅಲ್ಲಿ ಆಗಿರುವುದೇನು ಎಂಬುದನ್ನು ಹುಡುಕುತ್ತಾ ಹೋದರೆ, ಬಹುಶಃ ಅದು ಈ ನಾಡಿನ ಪ್ರಜಾತಂತ್ರ ವ್ಯವಸ್ಥೆಗೆ ಬಂದಿರುವ ಗಂಡಾಂತಾರ ಎನ್ನುವುದು ನೀವು ಸೂಕ್ಷ್ಮ ಮತಿಗಳಾಗಿದ್ದರೆ ತಿಳಿದು ಹೋಗುತ್ತದೆ.

***

ಮೇಲಿನ ಎರಡು ವಿಚಾರಗಳು ಬೇರೆ ಬೇರೆಯಾಗಿದ್ದರೂ, ಸಾರಾಂಶ ಒಂದೇ. ಎಲ್ಲರಿಗೂ ಶಿಕ್ಷಣ, ಆರೋಗ್ಯ, ವಸತಿ ಮತ್ತು ಬದುಕಲು ಆಹಾರ ನೀಡಬೇಕೆಂಬುದು ನಮ್ಮ ಪ್ರಜಾತಂತ್ರ ವ್ಯವಸ್ಥೆಯ ಆಶಯಗಳಲ್ಲಿ ಪ್ರಮುಖ. ಆದರೆ, ಶಿಕ್ಷಣ ಮತ್ತು ಆರೋಗ್ಯ ಮಠ ಮಾನ್ಯಗಳು ಮತ್ತು ಹಣವಂತರ ಕೈಗೆ ಸಿಲುಕಿ ಹೋಗಿದೆ. ಈ ನಾಡಿನ ದಲಿತನೊಬ್ಬ ಸುಲಭವಾಗಿ ಶಿಕ್ಷಣ ಪಡೆಯಲು ಇನ್ನೂ ಸಾಧ್ಯವಿಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ಅಂತಹದರಲ್ಲಿ ಎಲ್ಲ ಜಾತಿ ಜನಾಂಗದ ಪ್ರಜೆಗಳಿಂದ ಆರಿಸಿದ ಹೋದ ನೀವು ಸಮಾನತೆಯ ತತ್ವ ಬೋಧಿಸುವ ಸಂವಿಧಾನದ ನೀತಿ ನಿಯಮಾವಳಿಗಳನ್ನು ಹೇಗೆ ಪಾಲಿಸುತ್ತಿದ್ದೀರಿ? ಆಯವ್ಯಯದಲ್ಲಿ ಮಠ ಮಾನ್ಯಗಳೇ ತಮ್ಮ ಆಯ್ಕೆಗೆ ಕಾರಣ ಎಂಬಂತೆ ಮುಖ್ಯಮಂತ್ರಿ ಯಡಿಯೂರಪ್ಪ ತೆರಿಗೆ ಹಣವನ್ನು ಪುಕ್ಕಟ್ಟೆ ಹಂಚಿದ್ದಾರೆ. ಹಾಗಾದರೆ, ಮತದಾರ ಮಹಾಪ್ರಭು ಎಂಬ ಮಾತು ಈ ರಾಜಕಾರಣಿಗಳಿಗೆ ಇಷ್ಟು ಬೇಗ ಮರೆತು ಹೋಯಿತೇ? ಅಥವಾ ಮರೆಗುಳಿಗಳು ಮಾತ್ರ ರಾಜಕಾರಣಿಗಳಾಗಲು ಸಾಧ್ಯವೇ?

***

ಮಠಗಳ ಬಗ್ಗೆ ಹಿರಿಯ ಸಾಹಿತಿ ಡಾ.ಎಲ್.ಬಸವರಾಜು ಅವರು ಆಡಿದ ಮಾತುಗಳು ಎಷ್ಟು ಪ್ರಸ್ತುತವಾಗಿದೆ ಎಂಬುದು ಈ ಬಾರಿ ಆಯವ್ಯಯವನ್ನು ನೋಡಿದರೆ ತಿಳಿದು ಹೋಗುತ್ತದೆ. ಯಡಿಯೂರಪ್ಪ ಅದರಲ್ಲಿಯೂ ಜಾಣರು, ತಾವು ಯಾವ ಜಾತಿ ಜನಾಂಗವನ್ನು ಎದುರು ಹಾಕಿಕೊಳ್ಳದೆ ಎಲ್ಲರಿಗೂ ಹಣವನ್ನು ಕೋಟಿಗಳ ಲೆಕ್ಕದಲ್ಲಿ ಹಂಚಿದ್ದಾರೆ. ಮಠಗಳು ತೃಪ್ತಿಯಾದರೆ, ಇಡಿ ನಾಡಿನ ಜನತೆ ತೃಪ್ತರಾದಂತೆ ಎಂಬುದು ಅವರ ಸಾದಾ ಲೆಕ್ಕಾಚಾರ. ಆದರೆ, ಅವರಿಗೆ ತಿಳಿಯದೇ ಇರುವ ಒಂದು ಸತ್ಯವೆಂದರೆ ಹೀಗೆ ಹಣ ಪಡೆಯುವ ಮಠಗಳ್ಯಾವುವೂ ನಾಡಿನ ಜನತೆಗೆ ಪುಕ್ಕಟ್ಟೆಯಾಗಿ ಸೇವೆ ಮಾಡುವುದಿಲ್ಲ. ಅಥವಾ ಜನಸೇವೆ ಎಂಬುದನ್ನು ಎಂದೋ ಮರೆತು ಹೋಗಿವೆ. ಅಷ್ಟಕ್ಕೂ ಮಠಗಳ ಹಾಗೂ ಹಣವಂತರ ಸುರ್ಪದಿಯಲ್ಲಿಯೇ ಮೆಡಿಕಲ್ ಕಾಲೇಜುಗಳು, ಎಂಜನಿಯರಿಂಗ್ ಕಾಲೇಜುಗಳು ಇರಬೇಕು ಯಾಕೆ? ಪ್ರಜಾತಂತ್ರ ವ್ಯವಸ್ಥೆಯಲ್ಲಿನ ಸರಕಾರದ ಕರ್ತವ್ಯಗಳಾದರೂ ಏನು? ಈ ಪ್ರಶ್ನೆ ಕೇಳುವ ಧ್ವನಿಯನ್ನು ನಮ್ಮ ನಾಡಿನ ಚಳವಳಿಗಳು ಕಳೆದುಕೊಂಡಿವೆ ಅಥವಾ ಚದುರಿ ಹೋಗಿವೆ..!

***

ಎಲ್ಲವನ್ನು ಸರಕಾರವೇ ಮಾಡಲು ಸಾಧ್ಯವಿಲ್ಲ, ಈ ಮಠ ಮಾನ್ಯಗಳು ಇರುವುದರಿಂದಲೇ ನಾವಿಷ್ಟು ಸುಭಿಕ್ಷವಾಗಿದ್ದೇವೆ. ಹೀಗೆಂದು ಭಾಷಣ ಬಿಗಿಯುತ್ತಲೇ ದುಂಡಗಾಗುವ ರಾಜಕಾರಣಿಗಳು ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುವ ಕೆಲಸವನ್ನು ಮಾಡುತ್ತಿದ್ದಾರೆ. ಅದನ್ನು ಬಿಜೆಪಿ ಇನ್ನಷ್ಟು ಪ್ರಭಾವಶಾಲಿಯಾಗಿ ತೋರಿಸುತ್ತಿದೆಯಷ್ಟೇ. ವಿಷಾದವೆಂದರೆ ಕರ್ನಾಟಕದಲ್ಲಿ ಜಾತಿಯ ಮಠಗಳು ಶ್ರೀಮಂತ. ಆ ಜಾತಿಯ ಜನರು ಮಾತ್ರ ಬಡವರು. ವಿಷಯವನ್ನು ಇನ್ನೂ ನೇರವಾಗಿ ಹೇಳುವುದಾದರೆ, ನಾಡನ್ನು ಆಳುತ್ತಿರುವುದು ಪ್ರಬಲ ಜಾತಿಯ ಮಠಗಳು, ನಮ್ಮದು ಪ್ರಜಾತಂತ್ರ ವ್ಯವಸ್ಥೆಯ ಸರಕಾರವಲ್ಲ. ಇದು ನಿಜವಾದ ವೈರುಧ್ಯ.

***

ಬಸವಣ್ಣನವರು ಅನುಭವ ಮಂಟಪ ಕಟ್ಟಿದಾಗ ಅಲ್ಲಿ ಜಾತಿಯ ಗೌಜುಗಳಿರಲಿಲ್ಲ, ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ ಹೀಗೆ ಎಲ್ಲರು ಶರಣರಾಗಿದ್ದರು. ಆದರೆ, ಆ ಶರಣ ಎಂಬ ಸಂಸ್ಕೃತಿ ಒಂದೊಂದು ಮಠದ ವ್ಯಾಪ್ತಿಗೆ ಸೀಮಿತವಾಗಿ ಸರಕಾರವನ್ನು ಶರಣು ಮಾಡಿಸಿಕೊಂಡಿದೆ. ಲಿಂಗಾಯಿತರು ಎಂಬ ಕಾರಣಕ್ಕಾಗಿ ಯಡಿಯೂರಪ್ಪನವರ ಆಪ್ತ ವ್ಯಾಪ್ತಿಯ ಅಧಿಕಾರಿಗಳೆಲ್ಲಾ ಅದೇ ಜಾತಿಯವರಾಗಿರುತ್ತಾರೆ. ದೇಶಪ್ರೇಮ ಹೇಳುವ ಬಿಜೆಪಿಯವರು ಜಾತಿ ಮೀರಿದ ರಾಜಕಾರಣವನ್ನು ಮಾಡಿ ತೋರಿಸಬಹುದಿತ್ತು. ಅದಕ್ಕೊಂದು ಸದಾವಕಾಶವೂ ಇತ್ತು. ಆದರೆ, ಅವರೂ ಮಾಡಿದ್ದು ಕಾಂಗ್ರೆಸ್ ಹಾಗೂ ಜನತಾದಳಗಳ ಕೆಲಸವನ್ನೆ.

ಈ ಹಿಂದೆ ಕಾಂಗ್ರೆಸ್ ಹಾಗೂ ದಳ ಮಠ ಮಾನ್ಯಗಳನ್ನು ಹಚ್ಚಿಕೊಂಡಿದ್ದವಾದರೂ, ನೆಚ್ಚಿಕೊಂಡಿರಲಿಲ್ಲ. ಹೀಗೆ ಮನಸೋ ಇಚ್ಛೆ ಬೊಕ್ಕಸದ ಹಣವನ್ನು ಧಾರೆಯೆರದಿರಲಿಲ್ಲ. ಯಡಿಯೂರಪ್ಪನವರು ಮುಂದಿನ ದಿನಗಳಲ್ಲಿ ಮಠ, ಮಂದಿರಗಳನ್ನು ಇನ್ನಷ್ಟು ಉದ್ಧಾರ ಮಾಡುವ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಅದು ಅವರ ಲೋಕಸಭೆ ಎಲೆಕ್ಷನ್ ಲೆಕ್ಕಾಚಾರ ಆಗಿರಬಹುದು. ಆದರೆ, ಮುಂದೊಂದು ದಿನ ಇದೇ ಮಠಗಳ ಯಜಮಾನರು ಪಾಳೆಗಾರರಂತೆ ನಾಡನ್ನು ಆಳುವಾಗ ಪರಿತಪಿಸುವ ಜನ ಶಪಿಸುವುದು ರಾಜಕಾರಣಿಗಳನ್ನೆ ಎಂಬುದನ್ನು ಅವರು ಮರೆತಂತಿದೆ.

***

ಮೇಲ್ವರ್ಗದ ಮಠವೊಂದರ ಶಿಕ್ಷಣ ಸಂಸ್ಥೆಯಲ್ಲಿ ದಲಿತನೊಬ್ಬ ಅತ್ಯಂತ ಸುಲಭವಾಗಿ ಕೆಲಸ ಪಡೆಯಲು ಸಾಧ್ಯವೇ? ಅಂತಹ ಸಾಧ್ಯತೆಗಳು ಶೇ ೨ ರಷ್ಟ್ಟೂ ಇರಲಾರದು. ಹಾಗೆಂದು ಸರಕಾರಿ ಕೆಲಸಕ್ಕೆ ಪ್ರಯತ್ನ ಮಾಡಲು ಹೊರಟರೆ, ಕೆಪಿಎಸ್‌ಸಿ ಎಂಬ ಕಿತ್ತುತಿನ್ನುವ ನರರಾಕ್ಷಸ ಸೌಧದಲ್ಲಿ ಗರಿಗರಿಯ ನೋಟುಗಳನ್ನು ಎಣಿಸಿಕೊಳ್ಳಲು ಹರಿವಾಣ ಮುಂದಿಟ್ಟು ಕುಳಿತುಕೊಂಡಿದೆ ವ್ಯವಸ್ಥೆ. ಶಿಕ್ಷಣ ಸಂಸ್ಥೆಗಳನ್ನೆಲ್ಲಾ ಸರಕಾರ ಹೀಗೆ ಮಠಗಳಿಗೆ ಧಾರೆಯೆರೆದಿರುವಾಗ ಆದೇ ದಲಿತ ತನ್ನ ಹೊಟ್ಟೆಗಾಗಿ ಸನಾತನ ಧರ್ಮಕ್ಕೆ ತಲೆಬಾಗಲೇಬೇಕು. ಸವರ್ಣೀಯ ವ್ಯವಸ್ಥೆಗೆ ತಲೆಬಾಗುವ ಪದ್ಧತಿ ಅನೂಚಾನವಾಗಿ ಅವರ ಮುಂದಿನ ಪೀಳಿಗೆಗೆ ಮುಂದುವರಿಯಬೇಕು. ಹಾಗಾಗಿ ಮಠಗಳು ಹಾಗೂ ಸ್ವಾಮೀಜಿಗಳು ಜಗದ್ಗುರುಗಳಾಗಿ ಈ ಸರಕಾರದ ನೀತಿ ನಿಯಮಗಳನ್ನು ರೂಪಿಸುವವವರಾಗುತ್ತಾರೆ. ಅದನ್ನು ಈ ನಾಡಿನ ಎಲ್ಲ ಶ್ರೀಸಾಮಾನ್ಯರು ಪಾಲಿಸಬೇಕಾಗುತ್ತದೆ.

ನಾಡಿನ ಮಠಮಂದಿರಗಳಲ್ಲಿ sಸ್ವಾಮೀಜಿ ಆನಂತರ ಇರುವ ಪ್ರಮುಖ ಸ್ಥಾನಗಳಲ್ಲಿ ಅನ್ಯ ಜಾತಿಯವರು ಇದ್ದಾರಾ..ಅಥವಾ ಭಕ್ತರು ಇದ್ದಾರಾ ಎಂದು ನೋಡಿದರೆ, ಊಹೂಂ ಇಲ್ಲ. ಯಾರು ಸ್ವಾಮೀಜಿಗಳಾಗಿದ್ದರೂ, ಅವರ ಕುಟುಂಬದ ಪರಂಪರಾಗತ ಸ್ವತ್ತಾಗಿ ಮಠದ ಪ್ರಮುಖ ಸ್ಥಾನಗಳು ಪರಿಗಣಿತವಾಗಿರುತ್ತದೆ. ಆ ಸ್ವಾಮೀಜಿಯ ಇಡೀ ಕುಟುಂಬದ ಸದಸ್ಯರೇ ಮಠದ ಒಂದೊಂದು ಜವಾಬ್ದಾರಿಯನ್ನು ತೆಗೆದುಕೊಂಡಿರುತ್ತಾರೆ!

***

ನೈತಿಕತೆಯ ಬಗ್ಗೆ ಜನರಲ್ಲಿ ಪ್ರಜ್ಞೆ ಮೂಡಿಸಬೇಕಾದ ಮಠಗಳೆಲ್ಲಾ ಇಂದು ಜಾಗತೀಕರಣದ ನೆಪದಲ್ಲಿ ಹಣ ವಸೂಲಿ ಮಾಡುವ ಸೇವಾ ಕೇಂದ್ರಗಳಾಗಿ ಪರಿವರ್ತನೆಯಾಗಿವೆ. ಸ್ನೇಹಿತರೊಬ್ಬರು ಹೇಳುತ್ತಿದ್ದು ಈಗಲೂ ಪ್ರಸ್ತುತವೆನಿಸುತ್ತದೆ. ಕರ್ನಾಟಕವೂ ಸೇರಿದಂತೆ ಭಾರತದಲ್ಲಿನ ಕೆಲವು ಶ್ರೀಮಂತ ಮಠಗಳ ಸ್ವಾಮೀಜಿಗಳು ಜಗತ್ತಿನ ಅತ್ಯುತ್ತಮ ಸಿಇಓಗಳು ಎಂದು. ಹೌದು, ಅಧ್ಯಾತ್ಮಿಕ ಅನುಭವಗಳ ಶ್ರೀಮಂತಿಕೆಯನ್ನು ಕಟ್ಟಿಕೊಡುವ ಬದಲು, ಎಂಜನಿಯರಿಂಗ್, ಮೆಡಿಕಲ್ ಕಾಲೇಜುಗಳ ವ್ಯವಹಾರವೇ ಪ್ರಸ್ತುತ ಎನಿಸುವ ಅವರ ಕಾರ್ಯವೈಖರಿ, ಶಿಕ್ಷಣ ಕ್ಷೇತ್ರದ ಅಷ್ಟೂ ವ್ಯವಸ್ಥೆಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಬೇಕು ಎನ್ನುವ ಅವರ ಹಪಾಪಿತನದ ಬಗ್ಗೆ ಖೇದವೆನಿಸುತ್ತದೆ. ಇದಕ್ಕೆ ಅವಕಾಶ ಮಾಡಿಕೊಡುವ ಸರಕಾರ ಇನ್ನಾವ ಜನಕಲ್ಯಾಣ ಮಾಡಲು ಸಾಧ್ಯ ಎನ್ನುವುದನ್ನು ನಾವು ಆಲೋಚನೆ ಮಾಡುವ ಕಾಲ ಹತ್ತಿರ ಬಂದಿದೆ.

ಇಂತಹ ಸಂದರ್ಭದಲ್ಲಿ ನನಗೆ ನನ್ನ ಗುರುಗಳಾದ ಪ್ರೊ.ಕೆ.ರಾಮದಾಸ್ ನೆನಪಾಗುತ್ತಾರೆ. ಯಡಿಯೂರಪ್ಪನವರ ಆಯವ್ಯಯ ನೋಡಿದ್ದರೆ, ಅವರೊಬ್ಬರಾದರೂ ಧ್ವನಿಯೆತ್ತಿ ಸರಕಾರದ ಮಠಗಳ ಓಲೈಕೆ ಕ್ರಮವನ್ನು ಬಹಿರಂಗವಾಗಿ ಖಂಡಿಸುತ್ತಿದ್ದರು. ಸರಕಾರದ ನೈತಿಕತೆಯನ್ನು ಪ್ರಶ್ನೆ ಮಾಡುತ್ತಿದ್ದರು. ಜನರ ತೆರಿಗೆ ಹಣವನ್ನು ಬಿಜೆಪಿ ತನ್ನ ಪಕ್ಷದ ಸ್ವತ್ತು ಎಂಬ ಧಾಟಿಯಲ್ಲಿ ಹಂಚಿಕೆ ಮಾಡಲು ಹೋರಟಿರುವುದನ್ನು ವಿರೋಧಿಸಿ ಹೋರಾಟವನ್ನಾದರೂ ಮಾಡುತ್ತಿದ್ದರು. ಈಗ ಅಂತಹ ಧ್ವನಿಯೆತ್ತಲು ನಮ್ಮಲ್ಲಿ ಯಾರೂ ಇಲ್ಲವೇ ಎಂಬ ಪ್ರಶ್ನೆ ಎದುರಾಗುತ್ತದೆ. ಕನಿಷ್ಟ ಪಕ್ಷ ಅದನ್ನು ಉಗ್ರವಾಗಿ ವಿರೋಧಿಸುವ ತಾಕತ್ತು ಕಾಂಗ್ರೆಸ್ ಹಾಗೂ ಜಾ.ದಳ ಪಕ್ಷಗಳು ಕಳೆದುಕೊಂಡಿವೆಯಲ್ಲ ಎಂಬ ನೋವು ಕಾಡುತ್ತದೆ.

***

ದಲಿತರು,ಹಿಂದುಳಿದವರ ಹೆಸರನ್ನು ಹೇಳಿಕೊಂಡು ಅಧಿಕಾರಕ್ಕೆ ಬಂದ ಯಾವ ಸರಕಾರಗಳೂ ಅವರಿಗೆ ಕಿಂಚಿತ್ತ್ತೂ ಒಳ್ಳೆಯದನ್ನು ಮಾಡಲು ಪ್ರಯತ್ನ ಮಾಡಿಲ್ಲ, ಮಾಡಿದ್ದರೂ, ಅದು ಮಧ್ಯವರ್ತಿಗಳ ಪಾಲಾಗಿದೆ. ಅದನ್ನು ಗಮನಿಸಿಯಾದರೂ, ಯಡಿಯೂರಪ್ಪನವರು ಇನ್ನೂ ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳಬಹುದಿತ್ತು. ಮಠಗಳಿಗೆ ಕೊಡುವ ಹಣವನ್ನೆ ಜಿಲ್ಲೆಗೊಂದರಂತೆ ಗುಡಿಕೈಗಾರಿಕೆಗಳ ಅಭಿವೃದ್ಧಿಗೆ ಬಳಸಬಹುದಿತ್ತು. ಅಥವಾ ನಿರುದ್ಯೋಗಿಗಳ ನೆರವಿಗೆ ಹೊಸ ಕಾರ್ಯಕ್ರಮ ರೂಪಿಸಬಹುದಿತ್ತು. ಎಲ್ಲರಂತೆ ತಮ್ಮ ಜಾತಿಯ ಅಂಧಾನುಕರಣೆಯಲ್ಲಿ ಮುಳುಗಿ ಹೋಗಿರುವ ಅವರು ಮತ್ತು ಅವರ ಪಕ್ಷ ಜನರನ್ನು ವಂಚಿಸುವ ಇನ್ನೊಂದು ಸರಕಾರವಾಗಿ ಇತಿಹಾಸದಲ್ಲಿ ದಾಖಲಾಗಿ ಹೋಗುತ್ತದೆ ಎನ್ನುವುದಂತೂ ದಿಟ.

No comments: